* 2024 ನೇ ಸಾಲಿನ ಡಿ.ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಗೆ ಮಾಜಿ ಸಚಿವ, ಕಾರ್ಮಿಕ ಹೋರಾಟಗಾರ ಎಸ್‌ಕೆ.ಕಾಂತಾ ಅವರನ್ನು ಆಯ್ಕೆ ಮಾಡಲಾಗಿದೆ.* ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಈ ಕುರಿತು ಸುದ್ದಿಗೋಷ್ಠಿ ಯಲ್ಲಿ ಮಾಹಿತಿ ನೀಡಿದ್ದಾರೆ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರ ನೇತೃತ್ವದ ಆಯ್ಕೆ ಸಮಿತಿಯು ಎಸ್‌ಕೆ.ಕಾಂತಾ ಅವರನ್ನು ಆಯ್ಕೆ ಮಾಡಿದೆ. * ಡಿ.ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಯು ₹5 ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ.* ಕಲಬುರಗಿ ಜಿಲ್ಲೆಯ ಹಾಗರಗುಂಡಗಿಯಲ್ಲಿ 1938ರಲ್ಲಿ ಜನಿಸಿದ್ದ ಕಾಂತಾ ಅವರು ಬಡತನದ ಕಾರಣಕ್ಕೆ ಶಾಲೆ ತೊರೆದು ಜವಳಿ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡಿದ್ದರು. ಶೋಷಿತರು, ಕೂಲಿ ಕಾರ್ಮಿಕರ ಪರವಾಗಿ ಹಲವು ಹೋರಾಟ ನಡೆಸಿದ್ದಾರೆ. * 1967ರಲ್ಲಿ ಪ್ರಜಾ ಸೋಷಲಿಸ್ಟ್ ಪಕ್ಷ ಸೇರಿ ರಾಜಕೀಯ ಕ್ಷೇತ್ರಕ್ಕೆ ಬಂದರು. 1986ರಲ್ಲಿ ಕಾರ್ಮಿಕ ಸಚಿವರಾದರು. ಶಾಸಕ, ಸಚಿವರಾಗಿದ್ದ ಅವರು ಇಂದಿಗೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. ಅವರನ್ನು ಆಯ್ಕೆ ಮಾಡಿರುವುದು ಪ್ರಶಸ್ತಿಯ ಮೌಲ್ಯ ಹೆಚ್ಚಿಸಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. * ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆ.20ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಂಡಿರುವ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.