* ಆಡಳಿತಾರೂಢ ಮೈತ್ರಿಕೂಟ ನೇತೃತ್ವ ವಹಿಸಿದ್ದ ಜಾರ್ಖಂಡ್ ಮುಕ್ತಿ ಮೋರ್ಚಾದ ನಾಯಕ  ಚಂಪೈ ಸೊರೆನ್ ಅವರು ಸರ್ವಾನುಮತದಿಂದ ಜಾರ್ಖಂಡ್ ಮುಖ್ಯಮಂತ್ರಿಯಯಾಗಿ ಆಯ್ಕೆಯಾಗಿದ್ದಾರೆ.* ಭೂ ಅಕ್ರಮ ಪ್ರಕರಣ, ಅಕ್ರಮ ಗಣಿಗಾರಿಕೆ, ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ರಾಜಭವನಕ್ಕೆ ತೆರಳಿದ ಸೊರೆನ್ ಅಲ್ಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ರನ್ನು ಭೇಟಿ ಮಾಡಿ ರಾಜಿನಾಮೆ ನೀಡಿದ್ದಾರೆ. * ಶೀಘ್ರದಲ್ಲೇ ಚಂಪೈ ಸೊರೆನ್ ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಲು ಸಾರಿಗೆ ಸಚಿವ ಚಂಪೈ ಸೊರೆನ್ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಚಂಪೈ ಸೊರೆನ್‌ಗೆ 41 ಶಾಸಕರ ಬೆಂಬಲ ಇದೆ ಎಂದು ಹೇಳಲಾಗುತ್ತಿದೆ.* ಈ ಹಿಂದೆ ಮುಖ್ಯಮಂತ್ರಿ ಹುದ್ದೆಗೆ ರೇಸ್ ನಲ್ಲಿದ್ದ ಹೇಮಂತ್ ಸೊರೆನ್ ಪತ್ನಿ ಕಲ್ಪನಾ ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಇದಕ್ಕೆ ಕುಟುಂಬ ಹಾಗೂ ಪಕ್ಷದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಸ್ವತಃ ಹೇಮಂತ್ ಸೊರೆನ್ ಕುಟುಂಬಸ್ಥರೇ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಹೇಮಂತ್ ಸೊರೆನ್ ತಮ್ಮ ಆಪ್ತ ಹಾಗೂ ಸಂಪುಟದ ಹಿರಿಯ ಸಚಿವ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ.