* ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರು 95ನೇ ವಯಸ್ಸಿನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದರು. ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸಿದ ಅನುಭವಿ ಸಚಿವರಾಗಿಯೂ ಅವರು ಗುರುತಿಸಿಕೊಂಡಿದ್ದರು.* ರಾಜಕೀಯ ಕ್ಷೇತ್ರದಲ್ಲಷ್ಟೇ ಅಲ್ಲದೆ, ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲೂ ಶಾಮನೂರು ಶಿವಶಂಕರಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ. ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಸಂಸ್ಥೆಯಾದ ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿ ಸಮುದಾಯದ ಶೈಕ್ಷಣಿಕ ಮತ್ತು ಧಾರ್ಮಿಕ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು. ಬಾಪೂಜಿ ಎಂಜಿನಿಯರಿಂಗ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಇಂಜಿನಿಯರಿಂಗ್ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಮತ್ತು ವಿಕಸನಕ್ಕೆ ಕಾರಣರಾಗಿದ್ದರು. ಇದಲ್ಲದೆ, ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‌ಗಳ ಅಧ್ಯಕ್ಷರಾಗಿ ಸಮಾಜಸೇವೆ ಹಾಗೂ ಕ್ರೀಡಾ ಕ್ಷೇತ್ರಕ್ಕೂ ಬೆಂಬಲ ನೀಡಿದ್ದರು. ಶಿಕ್ಷಣವಾದಿ, ಕೈಗಾರಿಕೋದ್ಯಮಿ ಮತ್ತು ಶ್ಯಾಮನೂರು ಗ್ರೂಪ್‌ನ ಮಾಲೀಕರಾಗಿದ್ದ ಅವರು ಸಕ್ಕರೆ ಮತ್ತು ಡಿಸ್ಟಿಲರೀಸ್ ಉದ್ಯಮದಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು.* ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಕರ್ನಾಟಕವು ಒಬ್ಬ ಅನುಭವಿ ರಾಜಕೀಯ ನಾಯಕ, ಸಮಾಜಸೇವಕ ಮತ್ತು ಶಿಕ್ಷಣ ಪ್ರೋತ್ಸಾಹಕನನ್ನು ಕಳೆದುಕೊಂಡಂತಾಗಿದೆ.