* ಕನಕದಾಸ ಜಯಂತಿ ಪ್ರಯುಕ್ತ ರಾಜ್ಯ ಸರ್ಕಾರದಿಂದ ನೀಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಬಳ್ಳಾರಿಯ ಶ್ರೀ ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರು ಆಯ್ಕೆಯಾಗಿದ್ದಾರೆ. * ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಕನಕದಾಸರ ಪುತ್ಥಳಿ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.* ಕರ್ನಾಟಕ ಸರ್ಕಾರವು ಕನಕದಾಸರ ಜೀವನ, ಸಾಹಿತ್ಯ ಸಂದೇಶ ಮತ್ತು ಸಮಾಜಕ್ಕೆ ಅವರು ನೀಡಿದ ದಾರ್ಶನಿಕ ಕೊಡುಗೆ ಕುರಿತಂತೆ ಹಾಗೂ ದಾಸ ಸಾಹಿತ್ಯದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ವಿದ್ವಾಂಸರು, ಸಂಶೋಧಕರು, ಲೇಖಕರಿಗೆ `ಕನಕ ಶ್ರೀ’ ಎಂಬ ಪ್ರಶಸ್ತಿಯನ್ನು ಕೊಟ್ಟು ಗೌರವಿಸುತ್ತಿದೆ.* ವಿದ್ವಾಂಸ ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರು ವೇದ, ಉಪನಿಷತ್ತುಗಳು, ರಾಮಾಯಣ, ಮಹಾಭಾರತ, ಭಾಗವತಕ್ಕೆ ಸಂಬಂಧಿಸಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ನವೆಂಬರ್.18 ರಂದು(ಸೋಮವಾರ) ನಡೆಯಲಿರುವ ಕನಕದಾಸ ಜಯಂತಿ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ತಿಳಿಸಿದ್ದಾರೆ.* ಸಾಂಸ್ಕೃತಿಕ ಕ್ಷೇತ್ರದಲ್ಲಿನ ಅಪಾರ ಕೊಡುಗೆಗಾಗಿ 2005ರ ವರ್ಷದಲ್ಲಿ ಅಂದಿನ ರಾಷ್ಟ್ರಪತಿಗಳಾಗಿದ್ದ ದಿವಂಗತ ಭಾರತರತ್ನ ಡಾ.ಅಬ್ದುಲ್ ಕಲಾಂ ಅವರಿಂದ ಸ್ವಾತಂತ್ರ್ಯೋತ್ಸವ ಪ್ರಶಸ್ತಿ ಸ್ವೀಕರಿಸಿರುವ ಪ್ರಭಂಜನಾಚಾರ್ಯರಿಗೆ, 2002ರ ವರ್ಷದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಉಡುಪಿ ಪರ್ಯಾಯ ಪ್ರಶಸ್ತಿ ಅಲ್ಲದೆ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಪ್ರಸಿದ್ಧ ಸಂಘ ಸಂಸ್ಥೆಗಳ ಪ್ರಶಸ್ತಿ ಗೌರವಗಳು ಸಂದಿವೆ. * 1994ರಲ್ಲಿ ಇವರು ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ಮಧ್ವ ತತ್ವಶಾಸ್ತ್ರ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.