* ಪರಿಸರ ಕಾಳಜಿ, ಕಥೆ, ಕಾದಂಬರಿ ಹಾಗೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸಿರುವ ಹಿರಿಯ ಸಾಹಿತಿ ನಾ.ಡಿಸೋಜ ಅವರು ನಿಧನರಾಗಿದ್ದಾರೆ.* 87 ವರ್ಷದ ಸಾಗರದ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ (ಜನವರಿ 05) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.* ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 6ರಂದು ಡಿಸೋಜ ಜನಿಸಿದರು. ಪರಿಸರ ಕಾಳಜಿ ಜೊತೆಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.* ಡಿಸೋಜ ಅವರು ಬರೆದಿರುವ ಹಲವು ಕಾದಂಬರಿಗಳು ಸಿನಿಮಾಗಳಾಗಿ ಮೂಡಿಬಂದಿವೆ. ಇವುಗಳಲ್ಲಿ 'ಕಾಡಿನ ಬೆಂಕಿ' ಚಿತ್ರ ರಜತ ಕಮಲ ಪ್ರಶಸ್ತಿಯನ್ನ ಪಡೆದರೆ 'ದ್ವೀಪ' ಚಿತ್ರ ಸ್ವರ್ಣ ಕಮಲ ಪ್ರಶಸ್ತಿ ಗಳಿಸಿತ್ತು.* ನಾ. ಡಿಸೋಜ ಅವರು 75 ಕಾದಂಬರಿಗಳು, 6 ಚಾರಿತ್ರಿಕ ಕಾದಂಬರಿ, ಮಕ್ಕಳಿಗಾಗಿ 25 ಕಾದಂಬರಿ, 9 ಕಥಾ ಸಂಕಲನ, ಸಮಗ್ರ ಕಥೆಗಳ ಎರಡು ಸಂಪುಟಗಳು ಬರೆದಿದ್ದಾರೆ.* 'ಮುಳುಗಡೆಯ ಊರಿಗೆ ಬಂದವರು' ಎಂಬ ಮಕ್ಕಳ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ 'ಬಾಲ ಸಾಹಿತ್ಯ ಪುರಸ್ಕಾರ’ ಸಂದಿದೆ. 'ದ್ವೀಪ' ಮತ್ತು 'ಕಾಡಿನ ಬೆಂಕಿ' ಕಾದಂಬರಿಗಳು ಚಲನಚಿತ್ರಗಳಾಗಿ ರಾಷ್ಟ್ರಿಯ ಪ್ರಶಸ್ತಿಯನ್ನು ಗಳಿಸಿವೆ.* ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ, ಕುವೆಂಪು ವಿಶ್ವವಿದ್ಯಾಲಯದ ಗೌರವಾನ್ವಿತ ಡಾಕ್ಟರೇಟ್ ಮುಂತಾದ ಅನೇಕ ಗೌರವಗಳು ಡಿಸೋಜ ಅವರಿಗೆ ಸಂದಿವೆ.* ಲೋಕೋಪಯೋಗಿ ಇಲಾಖೆಯಲ್ಲಿ ವೃತ್ತಿಜೀವನ ಪ್ರಾರಂಭಿಸಿದ್ದ ನಾ. ಡಿಸೋಜ ಅವರು ಶರಾವತಿ ಯೋಜನೆ, ಕಾರ್ಗಲ್, ಮಾಸ್ತಿಕಟ್ಟೆ, ತೀರ್ಥಹಳ್ಳಿ, ಸಾಗರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು.* ನಾ. ಡಿಸೋಜ ಅವರು ಬರೆದಿರುವ ಕಾದಂಬರಿ ಆಧಾರಿತ ಶ್ರೀನಿವಾಸಮೂರ್ತಿ ನಿರ್ದೇಶನದ 'ಬಳುವಳಿ', ಕೋಡ್ಲು ರಾಮಕೃಷ್ಣರವರ ನಿರ್ದೇಶನದ 'ಬೆಟ್ಟದಪುರದ ದಿಟ್ಟ ಮಕ್ಕಳು' ಮತ್ತು ಮನು ನಿರ್ದೇಶನದ 'ಆಂತರ್ಯ' ಚಲನಚಿತ್ರಗಳಾಗಿ ಜನಪ್ರಿಯತೆ ಗಳಿಸಿವೆ.* 2014 ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.* ನಾ ಡಿಸೋಜಾ ಅವರ ಪಾರ್ಥಿವ ಶರೀರವನ್ನು ಇಂದು (ಸೋಮವಾರ) ಮಧ್ಯಾಹ್ನ ಸಾಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು.