* ಬುಡಕಟ್ಟು ಸಮುದಾಯದ ಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸುವ ಮೂಲಕ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (PM-JANMAN) ಯೋಜನೆಯಡಿ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಪೂವನಹಳ್ಳಿಯನ್ನು ಆಯ್ಕೆ ಮಾಡಲಾಗಿದೆ.* ಈ ವಿಷಯವನ್ನು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಯೋಜನೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಸಮರೋಪದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.* ಗಂಜಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪೂವನಹಳ್ಳಿ ಗ್ರಾಮವನ್ನು ಪಿಎಂ ಜನ್ ಮನ್ ಯೋಜನೆಗೆ ಪರಿಗಣಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ ವರ್ಷ ಈ ಯೋಜನೆಯನ್ನು ಘೋಷಿಸಿ ಬುಡಕಟ್ಟು ಸಮುದಾಯದ ಜನರು ವಾಸವಿರುವ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಣೆ ಮಾಡಿದ್ದರು.* 79,000 ಕೋಟಿಗಳ ಈ ಬೃಹತ್ ಯೋಜನೆಯ ಮೂಲಕ ದೇಶದ 63,000 ಹಳ್ಳಿಗಳನ್ನು ಆಮೂಲಾಗ್ರವಾಗಿ ಅಭಿವೃದ್ದಿ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. * ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಕೌಶಲ್ಯಾಭಿವೃದ್ಧಿ ಸೇರಿದಂತೆ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮಗಳನ್ನು 18 ಇಲಾಖೆಗಳು ಅನುಷ್ಠಾನಕ್ಕೆ ತರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.