➤ ಕಳೆದ ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಗೆ ಒಳಪಟ್ಟಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ವೈ. ಖೇಮಚಂದ್ ಸಿಂಗ್ (Yumnam Khemchand Singh) ಅವರು ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಈಗ ಖಚಿತವಾಗಿದೆ. ಮಂಗಳವಾರ ( 03-02-2026) ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಖೇಮಚಂದ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.➤ ಮಣಿಪುರದಲ್ಲಿ ಫೆಬ್ರುವರಿ 12ಕ್ಕೆ ರಾಷ್ಟ್ರಪತಿ ಆಳ್ವಿಕೆ ಅಂತ್ಯಗೊಳ್ಳಲಿದ್ದು, ವೈ. ಖೇಮಚಂದ್ ಸಿಂಗ್ ಅವರು ನೂತನ ಮುಖ್ಯಮಂತ್ರಿಯಾಗಿ ಹಾಗೂ ಕುಕಿ ಸಮುದಾಯದ ನೆಮ್ಮಾ ಕಿಪ್ಲೆನ್ ಅವರು ಉಪಮುಖ್ಯಮಂತ್ರಿಯಾಗಿ ಫೆಬ್ರುವರಿ 13ರಂದು ಹೊಸ ಸರ್ಕಾರವನ್ನು ರಚಿಸಲಿದ್ದಾರೆ.➤ ವೈ. ಖೇಮಚಂದ್ ಸಿಂಗ್: ಅವರು ಮಣಿಪುರ ರಾಜಕಾರಣದಲ್ಲಿ ಸುದೀರ್ಘ ಅನುಭವ ಹೊಂದಿರುವ ನಾಯಕ2017 ರಿಂದ 2022ರ ಅವಧಿಯಲ್ಲಿ ಮಣಿಪುರ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಶಿಕ್ಷಣ ಇಲಾಖೆಯ ಸಚಿವರಾಗಿ ಕೆಲಸ ಮಾಡಿದ್ದಾರೆ.- ಕಳೆದ ವರ್ಷ ಡಿಸೆಂಬರ್‌ನಲ್ಲಿ ಕುಕಿ ಸಮುದಾಯದ ಸಂತ್ರಸ್ತರ ಶಿಬಿರಕ್ಕೆ ಭೇಟಿ ನೀಡಿದ ಮೊದಲ ಮೈತೇಯಿ ಶಾಸಕ ಎಂಬ ಹೆಗ್ಗಳಿಕೆ ಇವರದ್ದಾಗಿದೆ. ಜನಾಂಗೀಯ ಸಂಘರ್ಷದ ನಡುವೆ ಎರಡು ಸಮುದಾಯಗಳನ್ನು ಒಗ್ಗೂಡಿಸುವ ಆಶಯ ಹೊಂದಿದ್ದಾರೆ.➤ ಮಹಿಳಾ ಉಪಮುಖ್ಯಮಂತ್ರಿ: ಮಣಿಪುರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಉಪಮುಖ್ಯಮಂತ್ರಿ ಪಟ್ಟಕ್ಕೇರುವ ಸಾಧ್ಯತೆಯಿದೆ. ಮಾಜಿ ಸಚಿವೆ ನೆಮ್ಮಾ ಕಿಪ್ಲೆನ್ ಅವರಿಗೆ ಈ ಸ್ಥಾನ ನೀಡುವ ಮೂಲಕ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿದೆ.➤ ಬಿರೇನ್ ಸಿಂಗ್ ರಾಜೀನಾಮೆ: ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ 2024ರ ಫೆಬ್ರುವರಿ 9ರಂದು ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಅಂದಿನಿಂದ ರಾಜ್ಯದಲ್ಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು.➤ ಕೇಂದ್ರ ವೀಕ್ಷಕರಾದ ತರುಣ್ ಚುಫ್ ಮತ್ತು ಸಂಬಿತ್ ಪಾತ್ರಾ ಅವರ ಸಮ್ಮುಖದಲ್ಲಿ ನಡೆದ ಈ ಆಯ್ಕೆಯು ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಎಂದು ಹೇಳಲಾಗುತ್ತಿದೆ. ಜನಪ್ರತಿನಿಧಿಗಳ ಸರ್ಕಾರ ಮರುಸ್ಥಾಪನೆಯಾಗುತ್ತಿರುವುದು ರಾಜ್ಯದ ಜನರಲ್ಲಿ ಹೊಸ ಆಸೆ ಮೂಡಿಸಿದೆ.